ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಕಾರ್ಕಳದ ನಿವಾಸಕ್ಕೆ ಅನಿರೀಕ್ಷಿತವಾಗಿ ರಾಜ್ಯ ಸರಕಾರದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾನುವಾರ ಭೇಟಿ ನೀಡಿದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉಡುಪಿ ಜಿಲ್ಲೆಯ ಪ್ರವಾಸದಲ್ಲಿದ್ದು, ಸಮಾರಂಭವೊಂದರಲ್ಲಿ ಭಾಗವಹಿಸಲು ಕಾರ್ಕಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಡಾ. ರಾಜೇಂದ್ರ ಕುಮಾರ್ ಅವರ ಮನೆಗೆ ಭೇಟಿ ನೀಡಿದರು.
ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ರಾಜ್ಯದ 35 ವಿಧಾನಸಭಾ ಕ್ಷೇತ್ರಗಳಲ್ಲಿ ಅತ್ಯಂತ ಪ್ರಭಾವ ಹೊಂದಿರುವರು. ಈ ಹಿನ್ನೆಲೆಯಲ್ಲಿ ರಾಜೇಂದ್ರ ಕುಮಾರ್ ಅವರನ್ನು ರಾಜಕೀಯಕ್ಕೆ ಕರೆತರಲು ಹಲವು ಬಾರಿ ಪ್ರಯತ್ನವೂ ನಡೆದಿತ್ತು. ಇದೀಗ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಯ ನಡುವೆ ಮತ್ತೆ ರಾಜ್ಯ ರಾಜಕಾರಣಕ್ಕೆ ಕರೆತರುವ ಉದ್ದೇಶದಿಂದ ಈ ಭೇಟಿ ನಡೆಸಿ, ಸಮಾಲೋಚನೆ ನಡೆಸಿದರು.
ಡಿ.ಕೆ. ಶಿವಕುಮಾರ್ ಅವರು ಈ ಹಿಂದೆ ರಾಜ್ಯ ಸರಕಾರದ ಸಹಕಾರ ಸಚಿವರಾಗಿದ್ದ ಸಂದರ್ಭದಲ್ಲಿ ನವೋದಯ ಸ್ವ-ಸಹಾಯ ಸಂಘಗಳ ಸಂಘಟನೆಗೆ ಚಾಲನೆ ನೀಡಿದ್ದರು. ಮಾತ್ರವಲ್ಲ, ರಾಜೇಂದ್ರ ಕುಮಾರ್ ಅವರೊಂದಿಗೆ ಅಂದಿನಿಂದ ಇಂದಿನವರೆಗೆ ಅತ್ಯಂತ ಆತ್ಮೀಯರಾಗಿದ್ದರು.
ಈ ಸಂದರ್ಭದಲ್ಲಿ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರು ಡಿ.ಕೆ.ಶಿವಕುಮಾರ್ ಅವರನ್ನು ಗೌರವ ಪೂರ್ವಕವಾಗಿ ಸ್ವಾಗತಿಸಿ, ಸನ್ಮಾನಿಸಿದರು.
ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಕಾಂಗ್ರೆಸ್ ಮುಖಂಡರಾದ ಮಿಥುನ್ ರೈ, ಎಂ.ಎಸ್. ಮಹಮ್ಮದ್, ಸುಧಾಕರ್ ಶೆಟ್ಟಿ ಹಾಗೂ ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ನ ಟ್ರಸ್ಟಿ ಸುನಿಲ್ ಕುಮಾರ್ ಬಜಗೋಳಿ ಉಪಸ್ಥಿತರಿದ್ದರು.